ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ

ಸ್ಥಳೀಯ ಪೊಲೀಸರ ನೆರವಿನಿಂದ 15ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಿ 15 ವಾಣಿಜ್ಯ ಮಳಿಗೆಗಳು ಹಾಗೂ ಶೆಡ್‍ಗಳನ್ನು ನೆಲಸಮ ಮಾಡಿ ಜಾಗವನ್ನು ಬಿಡಿಎ ವಶಕ್ಕೆ ತೆಗೆದುಕೊಂಡಿದೆ.

Written by - Zee Kannada News Desk | Last Updated : Jun 28, 2022, 02:12 PM IST
  • ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿಗಳು
  • 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ
  • 15ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್‍ಗಳ ತೆರವು
ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ title=
100 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ

ಬೆಂಗಳೂರು: ಮಂಗಳವಾರ ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೆಸಿಬಿಗಳು ಘರ್ಜಿಸಿವೆ. ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್‍ಗಳನ್ನು ತೆರವುಗೊಳಿಸಿವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಸುಮಾರು 100 ಕೋಟಿ ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ.

ಎಚ್‍ಬಿಆರ್ ಬಡಾವಣೆಯ 2ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ 15ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್‍ಗಳನ್ನು ನಿರ್ಮಿಸಿದ್ದರು.

ಸದರಿ ಸರ್ವೇ ನಂಬರ್‍ನ 6 ಎಕರೆ ಜಮೀನನ್ನು ಎಚ್‍ಬಿಆರ್ 2ನೇ ಹಂತದ ಬಡಾವಣೆ ನಿರ್ಮಾಣಕ್ಕೆ 1989ರಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು. ಈ ಪೈಕಿ ಒಂದೂವರೆ ಎಕರೆ ಜಾಗವನ್ನು ವರ್ತುಲ ರಸ್ತೆಗೆ ಬಳಸಿಕೊಳ್ಳಲಾಗಿತ್ತು. ಉಳಿದ ನಾಲ್ಕೂವರೆ ಎಕರೆ ಪೈಕಿ ಒಂದೂವರೆ ಎಕರೆ ಜಾಗವನ್ನು ಬಿಟ್ಟುಕೊಟ್ಟಿರಲಿಲ್ಲ.

ಇದನ್ನೂ ಓದಿ: ಗಾಯದ ಮೇಲೆ ಬರೆ: ಜುಲೈ 1ರಿಂದ ಮತ್ತೆ ವಿದ್ಯುತ್‌ ಬೆಲೆ ಏರಿಕೆ!

ಬಿಡಿಎ ಸ್ವಾಧೀನವನ್ನು ಪ್ರಶ್ನಿಸಿ ಮಾಲೀಕರು 1989ರಲ್ಲಿ ಸಿಟಿ ಸಿವಿಲ್ ಕೋರ್ಟಿನ ಮೊರೆ ಹೋಗಿದ್ದರಾದರೂ, ಬಿಡಿಎ ಪರವಾಗಿ ತೀರ್ಪು ಬಂದಿತ್ತು. ಇದಲ್ಲದೇ ಎರಡು ಬಾರಿ ಹೈಕೋರ್ಟ್‍ಗೆ ಹೋಗಿದ್ದರೂ ಅಲ್ಲಿಯೂ ಅವರಿಗೆ ಸೋಲುಂಟಾಗಿತ್ತು. ಆದಾಗ್ಯೂ ಸದರಿ ಜಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ ಅದರಿಂದ ಆದಾಯ ಗಳಿಸುತ್ತಿದ್ದರು. ಹಲವು ಬಾರಿ ಬಿಡಿಎ ಎಚ್ಚರಿಕೆ ನೀಡಿದ್ದರೂ ತೆರವು ಮಾಡಿರಲಿಲ್ಲ.

ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ

ಈ ಹಿನ್ನೆಲೆ ಮಂಗಳವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಕಾರ್ಯಪಾಲಕ ಇಂಜಿನಿಯರ್ ಜಿ.ಕುಮಾರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡವು ಸ್ಥಳೀಯ ಪೊಲೀಸರ ನೆರವಿನಿಂದ 15ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಿ 15 ವಾಣಿಜ್ಯ ಮಳಿಗೆಗಳು ಹಾಗೂ ಶೆಡ್‍ಗಳನ್ನು ನೆಲಸಮ ಮಾಡಿ ಜಾಗವನ್ನು ಬಿಡಿಎ ವಶಕ್ಕೆ ತೆಗೆದುಕೊಂಡಿದೆ.

200ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ

ಈ ಹಿಂದೆ ಮೂರ್ನಾಲ್ಕು ಬಾರಿ ಕಟ್ಟಡಗಳನ್ನು ನೆಲಸಮ ಮಾಡಲು ತೆರಳಿದ ಸಂದರ್ಭದಲ್ಲಿ ಮಾಲೀಕರು ತಮ್ಮ ಪ್ರಭಾವ ಬೀರಿ ಮತ್ತು ಪ್ರತಿಭಟನೆ ನಡೆಸಿದ್ದರಿಂದ ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಡಿಎ ಅಧಿಕಾರಿಗಳು 200ಕ್ಕೂ ಹೆಚ್ಚು ಪೊಲೀಸರ ಭದ್ರತೆಯನ್ನು ಪಡೆದುಕೊಂಡು ನೆಲಸಮ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: "ರೈತರಿಗೆ 33 ಲಕ್ಷ ರೂ. ಸಾಲ ನೀಡಲು ಸರ್ಕಾರ ತೀರ್ಮಾನ"

ಜಾಗ ವಾಪಸ್ ಕೊಡದಿದ್ದರೆ ಕ್ರಿಮಿನಲ್ ಕೇಸ್!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ‘ಬಿಡಿಎ ಉಸ್ತುವಾರಿಯನ್ನೂ ಹೊತ್ತಿರುವ ಸಿಎಂ ಬಸವರಾಜ್ ಬೊಮ್ಮಾಯಿಯವರು ಎಷ್ಟೇ ಪ್ರಭಾವಿಗಳು ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಜಾಗವನ್ನು ವಶಕ್ಕೆ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಅದರಂತೆ ಬಿಡಿಎ ಕ್ರಮ ಕೈಗೊಳ್ಳುತ್ತಿದೆ’ ಎಂದು ತಿಳಿಸಿದ್ದಾರೆ.

‘ಎಚ್‍ಬಿಆರ್, ಎಚ್ಎಸ್ಆರ್ ಬಡಾವಣೆಗಳು ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಸಾವಿರಾರು ಕೋಟಿ ರೂ. ಮೌಲ್ಯದ ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಮಾಹಿತಿಗಳು ಇವೆ. ಈ ಹಿನ್ನೆಲೆ ಒತ್ತುವರಿದಾರರು ಬಿಡಿಎ ಜಾಗವನ್ನು ಸ್ವಯಂಪ್ರೇರಿತವಾಗಿ ಕೂಡಲೇ ಬಿಟ್ಟುಕೊಡಬೇಕು. ಇಲ್ಲವಾದರೆ ಕಾನೂನು ರೀತಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸದರಿ ಜಾಗಗಳನ್ನು ವಶಪಡಿಸಿಕೊಳ್ಳಲಾಗುತ್ತದೆ’ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News