ಚಾಮುಂಡೇಶ್ವರಿಗೆ 5 ವರ್ಷಗಳ  ಗೃಹಲಕ್ಷ್ಮಿ ಯೋಜನೆಯ ಹಣ ಜಮಾ..!

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು.

Written by - Manjunath N | Last Updated : Nov 28, 2023, 04:24 PM IST
  • ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ
  • ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ
  • ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ
 ಚಾಮುಂಡೇಶ್ವರಿಗೆ 5 ವರ್ಷಗಳ  ಗೃಹಲಕ್ಷ್ಮಿ ಯೋಜನೆಯ ಹಣ ಜಮಾ..! title=

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.

ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. 

ಮೊದಲ ಕಂತು ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ 

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್  ನಾಯಕರು  ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್  ಸರ್ಕಾರ ಅಧಿಕಾರಕ್ಕೆ‌ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ.

ಇದನ್ನೂ ಓದಿ-ವೇಗವಾಗಿ ತೂಕ ಇಳಿಕೆ ಮಾಡುತ್ತೆ ಈ ಹಿಟ್ಟಿನ ರೊಟ್ಟಿ, ಬೇಸಿಗೆಯ ಜೊತೆಗೆ ಚಳಿಗಾಲದಲ್ಲಿಯೂ ಬೊಜ್ಜು ಕರಗಿಸುತ್ತೆ!

ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಮೊದಲು  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾನು, ಶಾಸಕರಾದ ದಿನೇಶ್ ಗೂಳಿಗೌಡ ಇತರ ಪ್ರಮುಖರು ದೇವಿಯ ದರ್ಶನ ಮಾಡಿ‌ ಹರಕೆ ತೀರಿಸಿದ್ದೆವು. ರಾಜ್ಯದ ಯಜಮಾನಿಯರ‌ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ.ಗಳ ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು ಎಂದು ಹೆಬಾಳ್ಕರ್ ಹೇಳಿಕೆಯಲ್ಲಿ ವಿವರಿಸಿದ್ದಾರೆ. 

ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು.  ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲಾ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

5 ವರ್ಷವೂ ಯೋಜನೆ

ಮಹಿಳೆಯರನ್ನು ಆರ್ಥಿಕವಾಗಿ  ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ. 

ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ. 

ಇದನ್ನೂ ಓದಿ-ತೂಕ ಇಳಿಕೆಗೆ ಕಾಶ್ಮೀರದ ಈ ಶಾಹಿ ಪೇಯ ಒಂದು ರಾಮಬಾಣ ಉಪಾಯ!

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಮಾಡಿದ ವಾಗ್ದಾನದಂತೆ ದೇವಿಗೆ ಹಣ ಸಲ್ಲಿಸುತ್ತಿದ್ದೇವೆ. ಮುಂದಿನ ಐದು ವರ್ಷ ಕೂಡ ನಿರಂತರವಾಗಿ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಲಿವೆ. ಮಾತ್ರವಲ್ಲ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಪುನಃ, ಪುನಃ ಮುಂದುವರಿಸಲಿದ್ದೇವೆ. ಯೋಜನೆ 3  ತಿಂಗಳಿಗೆ ನಿಲ್ಲುತ್ತದೆ, 6 ತಿಂಗಳಿಗೆ ಸ್ಥಗಿತವಾಗುತ್ತದೆ. ಲೋಕಸಭಾ ಚುನಾವಣೆಯ ನಂತರ ಮುಕ್ತಾಯವಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಅವುಗಳಿಗೆ  ಕಿವಿಗೊಡಬೇಡಿ. ಕೇವಲ ಈ ಐದು ವರ್ಷವಲ್ಲ,ಮುಂದಿನ ಐದು ವರ್ಷವೂ ನಾವೇ ಅಧಿಕಾರದಲ್ಲಿರುತ್ತೇವೆ. ಮತ್ತೆ ಈ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News