ಬಿಜೆಪಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನೂ ಗೊತ್ತಿಲ್ಲ: ಸಿದ್ದರಾಮಯ್ಯ

ಸಂಬಿತ್ ಪಾತ್ರಾ ಅವರು ಕರ್ನಾಟಕ ಕಾಂಗ್ರೆಸ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಮಾಡಿರುವ ಆರೋಪಗಳೆಲ್ಲಾ ಆಧಾರ ರಹಿತ ಮತ್ತು ರಾಜಕೀಯ ಪ್ರೇರಿತ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Last Updated : Sep 19, 2018, 08:00 PM IST
ಬಿಜೆಪಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನೂ ಗೊತ್ತಿಲ್ಲ: ಸಿದ್ದರಾಮಯ್ಯ title=

ಬೆಂಗಳೂರು: ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ನವದೆಹಲಿಯಲ್ಲಿ ಇಂದು ಮಧ್ಯಾಹ್ನ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಕಾಂಗ್ರೆಸ್ ವಿರುದ್ಧ ಮಾಡಿದ ಆರೋಪಗಳಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿ ಆಧಾರರಹಿತ ಆರೋಪ ಮಾಡುತ್ತಿದೆ. ಸುಳ್ಳು ಹೇಳುವುದು ಬಿಟ್ಟರೆ ಬಿಜೆಪಿಯವರಿಗೆ ಬೇರೆ ಏನು ಗೊತ್ತಿಲ್ಲ. ಸುಳ್ಳು ಹೇಳುವುದೇ ಅವರ ರಾಜಕೀಯ ಬಂಡವಾಳ. ಹಾಗಾಗಿ ಸಂಬಿತ್ ಪಾತ್ರಾ ಅವರು ಕರ್ನಾಟಕ ಕಾಂಗ್ರೆಸ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಮಾಡಿರುವ ಆರೋಪಗಳೆಲ್ಲಾ ಆಧಾರ ರಹಿತ ಮತ್ತು ರಾಜಕೀಯ ಪ್ರೇರಿತ ಎಂದಿದ್ದಾರೆ. 

ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ತೆರಿಗೆ ವಂಚನೆ ಪ್ರಕರಣದಲ್ಲಿ ಮೊಕದ್ದಮೆ ದಾಖಲಿಸಿದ ಬೆನ್ನಲೇ, ಕಾಂಗ್ರೆಸ್ ಹವಾಲ ಹಣ ಚಲಾವಣೆ ಮಾಡುತ್ತಿದೆ ಎಂದು ಆರೋಪಿಸಿ ನವದೆಹಲಿಯಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಸುದ್ದಿಗೋಷ್ಠಿ ನಡೆಸಿದ್ದರು. ಅಷ್ಟೇ ಅಲ್ಲದೆ, ರಾಹುಲ್​ ಗಾಂಧಿ ಕುಟುಂಬಕ್ಕೆ ಕರ್ನಾಟಕದ ಕಾಂಗ್ರೆಸ್​ ಎಟಿಎಂ ಆಗಿದೆ. ಹೈಕಮಾಂಡ್​'ಗೆ ಸಚಿವ ಡಿ.ಕೆ.ಶಿವಕುಮಾರ್ ಬೆಂಬಲಿಗರಿಂದ ಹಣ ಸಂದಾಯ ಆಗುತ್ತಿದೆ. ಇದರಿಂದ ಕಪ್ಪುಹಣ ಮತ್ತು ಕಾಂಗ್ರೆಸ್​ ನಂಟು ಬಯಲಾಗಿದೆ. ಅಂದಾಜು 600 ಕೋಟಿ ರೂಪಾಯಿಯನ್ನು ಡಿಕೆಶಿ ಸಂದಾಯ ಮಾಡಿದ್ದಾರೆ ಎಂದು ಆರೋಪಿಸಿದ್ದರು.

Trending News