ಎಚ್ಚರ! ರಾಜ್ಯದಲ್ಲಿ ಹೆಚ್ಚಾಯ್ತು ಮೆದುಳು ಜ್ವರ ಭೀತಿ: ಮಕ್ಕಳೇ ಇದರ ಟಾರ್ಗೆಟ್

ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ  ಆರಂಭವಾಗಲಿದೆ. ಈ ಅಭಿಯಾನದಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Written by - Manjunath Hosahalli | Edited by - Chetana Devarmani | Last Updated : Dec 4, 2022, 05:05 PM IST
  • ರಾಜ್ಯದಲ್ಲಿ ಹೆಚ್ಚಾಯ್ತು ಮೆದುಳು ಜ್ವರ ಭೀತಿ
  • ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭ
  • ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ
ಎಚ್ಚರ! ರಾಜ್ಯದಲ್ಲಿ ಹೆಚ್ಚಾಯ್ತು ಮೆದುಳು ಜ್ವರ ಭೀತಿ: ಮಕ್ಕಳೇ ಇದರ ಟಾರ್ಗೆಟ್  title=
ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ  ಆರಂಭವಾಗಲಿದೆ. ಈ ಅಭಿಯಾನದಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ. ಜೆಇ ಮೆದುಳು ಜ್ವರ 'ಪ್ಲೇವಿವೈರಸ್' ಎಂಬ ವೈರಾಣುವಿನಿಂದ ಬರುತ್ತದೆ. ಇದು ಕ್ಯುಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿರುವ ಈ ವೈರಾಣುವಿಗೆ ಮಾನವರು ಕಟ್ಟಕಡೆಯ ಹೋಸ್ಟ್ ಆಗಿರುತ್ತಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಜೆಇ ಲಸಿಕಾ ಅಭಿಯಾನ ಕುರಿತು ಮಾಹಿತಿ ನೀಡಿದ ಸಚಿವರು, ಡಿಸೆಂಬರ್ ಮೊದಲನೇ ವಾರದಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕಾಕರಣಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಉಚಿತವಾಗಿ ಜೆನವ್ಯಾಕ್ ಜೆಇ ಲಸಿಕೆಗಳನ್ನು ಸರಬರಾಜು ಮಾಡಿದೆ ಎಂದರು.

ಇದನ್ನೂ ಓದಿ : ಅಡುಗೆ ಮನೆಯ ಸಿಲೆಂಡರ್‌ ಬಳಿಯಿತ್ತು ದೈತ್ಯ ಕಾಳಿಂಗ ಸರ್ಪ!

ಪ್ರಪಂಚದಾದ್ಯಂತ 24 ರಾಷ್ಟ್ರಗಳಲ್ಲಿ ಜಪಾನೀಸ್ ಎನ್‍ಸೆಫಲೈಟಿಸ್ (ಜೆಇ) ಪಿಡುಗು ಗುರುತಿಸಲಾಗಿದೆ. ಭಾರತವೂ ಸೇರಿದಂತೆ ಏಷ್ಯಾದ 11 ಏಷ್ಯಾ ರಾಷ್ಟ್ರಗಳು ಈ ಪಟ್ಟಿಯಲ್ಲಿದೆ. ಪ್ರತಿ ವರ್ಷ ಸರಾಸರಿ 68,000 ಪ್ರಕರಣಗಳು ವರದಿಯಾಗುತ್ತಿದ್ದು, ಮರಣ ಪ್ರಮಾಣ ಶೇ.20 ರಿಂದ ಶೇ.30 ರಷ್ಟಿದೆ. ಗುಣಮುಖರಾದ ಶೇ.30 ರಿಂದ ಶೇ.50ರಷ್ಟು ಪ್ರಕರಣಗಳಲ್ಲಿ ನರದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟಾಗಿವೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ಜೆಇ ಮೆದುಳು ಜ್ವರದ ಮೊದಲ ಪ್ರಕರಣ 1955ರಲ್ಲಿ ತಮಿಳುನಾಡಿನ ವೆಲ್ಲೂರ್ ನಲ್ಲಿ ವರದಿಯಾಗಿತ್ತು. ಕರ್ನಾಟಕದಲ್ಲಿ 1978ರ ವೇಳೆ ಕೋಲಾರ ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಂಡುಬರುತ್ತಿದೆ. 2016 ರಲ್ಲಿ 11 ಪ್ರಕರಣಗಳು, 2017 ರಲ್ಲಿ 23 ಪ್ರಕರಣಗಳು, 2018 ರಲ್ಲಿ 35 ಪ್ರಕರಣಗಳು, 2019 ರಲ್ಲಿ 33 ಪ್ರಕರಣಗಳು, 2020 ರಲ್ಲಿ 19 ಪ್ರಕರಣಗಳು, 2021 ರಲ್ಲಿ 25 ಪ್ರಕರಣಗಳು, 2022 ರಲ್ಲಿ 21 ಪ್ರಕರಣಗಳು ಪತ್ತೆಯಾಗಿವೆ ಎಂದರು.

ರಾಜ್ಯದ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿ (ಎಸ್‍ಎಸ್‍ಎಲ್‍) ಗಳನ್ನು ಸಜ್ಜುಗೊಳಿಸಲಾಗಿದೆ. ನಿಮ್ಹಾನ್ಸ್ -ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ವಿಮ್ಸ್-ಬಳ್ಳಾರಿ, ಕಿಮ್ಸ್-ಹುಬ್ಬಳ್ಳಿ, ಡಿಪಿಎಚ್‍ಎಲ್-ಕೋಲಾರ, ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್-ಉಡುಪಿ, ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‍ಐವಿ)-ಬೆಂಗಳೂರು ಈ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಇದನ್ನೂ ಓದಿ : ಪಾರಿವಾಳ ಹಿಡಿಯಲು ಹೋಗಿ ಗಾಯಗೊಂಡಿದ್ದ ಬಾಲಕರ ಪೈಕಿ ಓರ್ವ ಸಾವು 

ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಡೋಸ್ ಲಸಿಕೆ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೆಇ ಹರಡದ ಅವಧಿಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಈ ಅಭಿಯಾನದಲ್ಲಿ 1-15 ವರ್ಷ ವಯಸ್ಸಿನ ಮಕ್ಕಳಿಗೆ ಒಂದು ಡೋಸ್ ಲಸಿಕೆ ನೀಡಲಾಗುವುದು. ನಾವೀಗ ಮೆದುಳು ಜ್ವರದ ವಿರುದ್ಧ ಯುದ್ಧ ಸಾರಬೇಕಿದ್ದು, ಇದಕ್ಕಾಗಿ ಆರೋಗ್ಯ ಇಲಾಖೆಯು ಎಲ್ಲಾ ರೀತಿಯಲ್ಲಿ ಸನ್ನದ್ಧವಾಗಿದೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News