ವಿದ್ಯುತ್ ಕೊರತೆ ಇದೆ, ಆದರೆ ಲೋಡ್‍ಶೆಡ್ಡಿಂಗ್ ಇಲ್ಲ- ಸಿಎಂ ಸ್ಪಷ್ಟನೆ

ಮುಂದಿನ ದಿನಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸುವಂತೆ ಎಲ್ಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Last Updated : Oct 26, 2018, 08:13 AM IST
ವಿದ್ಯುತ್ ಕೊರತೆ ಇದೆ, ಆದರೆ ಲೋಡ್‍ಶೆಡ್ಡಿಂಗ್ ಇಲ್ಲ- ಸಿಎಂ ಸ್ಪಷ್ಟನೆ title=

ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಯಾವುದೇ ವಿದ್ಯುತ್ ಸರಬರಾಜು ಕಂಪೆನಿಯೂ ಲೋಡ್‍ಶೆಡ್ಡಿಂಗ್ ಜಾರಿಗೆ ತಂದಿಲ್ಲ. ಮುಂದೆಯೂ ಲೋಡ್‍ಶೆಡ್ಡಿಂಗ್ ಜಾರಿ ಮಾಡದಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ಇಂದು ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಒಪ್ಪಂದದಂತೆ ಕಲ್ಲಿದ್ದಲು ಪೂರೈಕೆಯಾಗಿಲ್ಲ. ಈ ಕುರಿತು ಕೇಂದ್ರ ಸಚಿವರಿಗೆ ಪತ್ರ ಬರೆಯಲಾಗಿದೆ. ಕೇಂದ್ರ ಕಲ್ಲಿದ್ದಲು ಸಚಿವಾಲಯದೊಂದಿಗೆ ಮುಖ್ಯ ಕಾರ್ಯದರ್ಶಿಗಳು ಸಂಪರ್ಕದಲ್ಲಿದ್ದಾರೆ. ಆದಷ್ಟು ಬೇಗನೆ ಕಲ್ಲಿದ್ದಲು ದೊರಕುವ ಭರವಸೆ ದೊರೆತಿದೆ ಎಂದರು.

ಕಲ್ಲಿದ್ದಲು ಸಾಗಾಣಿಕೆ ಸಮರ್ಪಕವಾಗಿ ಆಗುವುದನ್ನು ಖಾತರಿಪಡಿಸಲು ಮತ್ತೊಮ್ಮೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗುವುದು. ಕಲ್ಲಿದ್ದಲು ಪೂರೈಕೆಯನ್ನು ಹಾಗೂ ಕಲ್ಲಿದ್ದಲಿನ ಸಾಗಾಣಿಕೆ ಸಕಾಲದಲ್ಲಿ ಆಗುವುದನ್ನು ಖಾತರಿ ಪಡಿಸಲು ಕಲ್ಲಿದ್ದಲು ಸಚಿವಾಲಯ, ರೈಲ್ವೆ ಕೇಂದ್ರ ಕಚೇರಿಯಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ರಾಜ್ಯದಲ್ಲಿ ಇದರಿಂದಾಗಿ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಲಾಗಿದೆ. ಪರ್ಯಾಯ ಮೂಲಗಳಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಸೌರ ವಿದ್ಯುತ್ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿರುವುದರಿಂದ ಹಾಗೂ ಜಲ ವಿದ್ಯುತ್ ಮೂಲದಿಂದ ಈ ನಷ್ಟವನ್ನು ಸರಿದೂಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸುವಂತೆ ಎಲ್ಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Trending News