ಬೆಳಗಾವಿಯಲ್ಲಿ ಕೋವಿಡ್-19 ವಾರ್ ರೂಮ್ ಗೆ ಚಾಲನೆ

ಸೋಂಕು ಪತ್ತೆ, ಸಂಪರ್ಕಿತರ ಮೇಲೆ ನಿಗಾ ಇಡಲು ತಂತ್ರಜ್ಞಾನ ಬಳಸಿಕೊಳ್ಳಲು ಕರೆ

Written by - Yashaswini V | Last Updated : Apr 24, 2020, 06:36 AM IST
ಬೆಳಗಾವಿಯಲ್ಲಿ ಕೋವಿಡ್-19 ವಾರ್ ರೂಮ್ ಗೆ ಚಾಲನೆ title=

ಬೆಳಗಾವಿ: ಕೋವಿಡ್-19 ಪತ್ತೆ ಮತ್ತು ನಿಯಂತ್ರಣ ಸೇರಿದಂತೆ ವಿವಿಧ ಕಾರ್ಯಚಟುವಟಿಕೆಗಳಿಗಾಗಿ ಸ್ಥಾಪಿಸಲಾಗಿರುವ ಕೋವಿಡ್-19 (Covid-19) ವಾರ್ ರೂಮ್ ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.23) ಚಾಲನೆ ನೀಡಿದರು.

ಇಲ್ಲಿನ ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಕೋವಿಡ್-19 ವಾರ್ ರೂಮ್ ಆರಂಭಿಸಲಾಗಿದೆ. ವಾರ್ ರೂಮ್ ಕಾರ್ಯಸ್ವರೂಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ (Laxman Savadi) ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ (Jagadish Shetter) ವಾರ್ ರೂಮ್ ನಲ್ಲಿ ಲಭ್ಯವಿರುವ ಅತ್ಯಾಧುನಿಕ ಸೌಲಭ್ಯ ಮತ್ತು ತಂತ್ರಜ್ಞಾನವನ್ನು ಕರೊನಾ ನಿಯಂತ್ರಣಕ್ಕೆ ಸಮರ್ಥವಾಗಿ ಬಳಸಿಕೊಳ್ಳುವಂತೆ ತಿಳಿಸಿದರು.

ವಾರ್ ರೂಮ್ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹಾಗೂ ಕೋವಿಡ್-19 ನಿಯಂತ್ರಣಾ ಕ್ರಮಗಳ ಉಸ್ತುವಾರಿಯಾಗಿರುವ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಅವರು, ಕೋವಿಡ್-19 ನಿಯಂತ್ರಣ, ಸೋಂಕಿತರ ಸಂಪರ್ಕದಲ್ಲಿ ಇರುವವರ ಪತ್ತೆ, ಜನರು ಮತ್ತು ವಾಹನ ಸಂಚಾರದ ಮೇಲೆ ವಾರ್ ರೂಮ್ ಮೂಲಕ ನಿಗಾ ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.

ಮೊಬೈಲ್ ಆಪ್, ವಿಡಿಯೋ ಫುಷ್ ಮತ್ತು ಸರ್ವೇಲನ್ಸ್, ಕಸ್ಮೈಸ್ಡ್ ಡ್ಯಾಶ್ ಬೋರ್ಡ್, ಸೋಂಕಿತರ ಜತೆ ಸಂಪರ್ಕಕ್ಕೆ ಬಂದವರನ್ನು ಮೊಬೈಲ್ ಸಂಖ್ಯೆ ಮೂಲಕ ಪತ್ತೆ ಹಚ್ಚುವಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಜನರ ಅಭಿಪ್ರಾಯ ಮತ್ತು ಅನಿಸಿಕೆಗಳನ್ನು ಸಂಗ್ರಹಿಸುವ ಮೂಲಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಬಳಸಲಾಗುತ್ತದೆ ಎಂದು ವಿವರಿಸಿದರು.

ಕ್ವಾರಂಟೈನ್ (Quarantine) ಕೇಂದ್ರಗಳು, ಕಂಟೈನ್ಮೆಂಟ್ ಝೋನ್ (Containment Zone) ಮತ್ತಿತರ ಕಡೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾ ಗಳನ್ನು ಕೂಡ ವಾರ್ ರೂಮ್ ಗೆ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕಂಟೈನ್ಮೆಂಟ್ ಝೋನ್ ಗಳಲ್ಲಿ ಜನರು ದಿನಸಿ, ತರಕಾರಿ, ಹಾಲು ಮತ್ತಿತರ ಅಗತ್ಯ ವಸ್ತುಗಳನ್ನು ಪಡೆಯಲು ಹೊರಗಡೆ ಬರದೇ ವಿಶೇಷ ಆಪ್ ಮೂಲಕ ಸಂಬಂಧಪಟ್ಟವರಿಗೆ ಮಾಹಿತಿಯನ್ನು ನೀಡಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್. ತಿಳಿಸಿದರು.

ಕಂಟೈನ್ಮೆಂಟ್ ಝೋನ್; ಅಗತ್ಯ ವಸ್ತುಗಳ ಪೂರೈಕೆಗೆ ಸೂಚನೆ:
ಕಂಟೈನ್ಮೆಂಟ್ ಝೋನ್ ಗಳಲ್ಲಿ ಲಾಕ್ ಡೌನ್ (Lockdown) ಕಟ್ಟುನಿಟ್ಟಾಗಿ ಜಾರಿಗೊಳಿಸಿರುವುದರಿಂದ ದಿನಸಿ, ತರಕಾರಿ ಮತ್ತಿತರರ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಬೇಕು. ಕುಡಚಿ, ಹಿರೇಬಾಗೇವಾಡಿ, ಸಂಕೇಶ್ಚರ ಮತ್ತಿತರ ಕಡೆಗಳಲ್ಲಿ ಡ್ರೋನ್ ಕ್ಯಾಮರಾ ಮೂಲಕ ನಿಗಾ ವಹಿಸಬೇಕು. ನಿಯಮಾವಳಿ ಉಲ್ಲಂಘಿಸಿದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ವಾರ್ ರೂಮ್ ಮೂಲಕವೇ ತಕ್ಷಣ ಎಚ್ಚರಿಕೆ ನೀಡಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಅದೇ ರೀತಿ ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿರುವ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವವರ ಮೇಲೆ ಕೂಡ ಸಿಸಿಟಿವಿ ಕ್ಯಾಮೆರಾ ಮೂಲಕ ನಿಗಾ ವಹಿಸಿದಾಗ ಮಾತ್ರ ಕ್ವಾರಂಟೈನ್ ಉದ್ದೇಶ ಈಡೇರುವುದು ಸಾಧ್ಯವಾಗುತ್ತದೆ. ಆದ್ದರಿಂದ ಅವರ ಮೇಲೆ ಕೂಡ ತೀವ್ರ ನಿಗಾ ವಹಿಸಬೇಕು ಎಂದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ‌ಸುರೇಶ್ ಅಂಗಡಿ (Suresh Angadi), ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ,  ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಸತೀಶ್ ಜಾರಕಿಹೊಳಿ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಅನಿಲ್ ಬೆನಕೆ, ಅಭಯ್ ಪಾಟೀಲ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಕರೋನಾವೈರಸ್ (Coronavirus) ಕೋವಿಡ್-೧೯ ನಿಯಂತ್ರಣಾ ಕ್ರಮಗಳ ಉಸ್ತುವಾರಿಯಾಗಿರುವ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಐಜಿಪಿ ರಾಘವೇಂದ್ರ ಸುಹಾಸ್, ಪೊಲೀಸ್ ಆಯುಕ್ತರಾದ  ಬಿ.ಎಸ್.ಲೋಕೇಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.
 

Trending News