ಲೋಕಸಭೆ ಚುನಾವಣೆಯತ್ತ ಗಮನಹರಿಸಿ: ಯಡಿಯೂರಪ್ಪಗೆ ಶಾ ಸೂಚನೆ

ಸೋಮವಾರ ಧಿಡೀರ್ ಅಂತ ಅಹಮದಾಬಾದ್ ಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.

Last Updated : Jun 26, 2018, 12:14 PM IST
ಲೋಕಸಭೆ ಚುನಾವಣೆಯತ್ತ ಗಮನಹರಿಸಿ: ಯಡಿಯೂರಪ್ಪಗೆ ಶಾ ಸೂಚನೆ title=
File Photo

ಬೆಂಗಳೂರು: ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಹಠಾತ್ತನೆ ಅಹಮದಾಬಾದ್‌ಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಸುದೀರ್ಘ‌ ಚರ್ಚೆ ನಡೆಸಿ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರದ ವಿದ್ಯಮಾನಗಳ ಸಮಗ್ರ ಮಾಹಿತಿಯನ್ನು ನೀಡಿ, ರಾಜ್ಯ ರಾಜಕಾರಣದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ್ದಾರೆ. 

ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಅತೃಪ್ತಿ ಹಾಗೂ ಕೆಲ ಕಾಂಗ್ರೆಸ್‌ ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿರುವ ಬಗ್ಗೆಯೂ ತಿಳಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುವುದು ಬೇಡ, ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ತಾನಾಗಿಯೇ ಪತನಗೊಳ್ಳಲಿದೆ. ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕಾರ್ಯತಂತ್ರ ರೂಪಿಸಿ. ಮುಂದಿನ ಅವಧಿಗೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕು. ಅದಕ್ಕಾಗಿ ಕರ್ನಾಟಕದಿಂದ 25ರಿಂದ 28 ಸ್ಥಾನ ಗೆಲ್ಲಲು ಪ್ರಯತ್ನಿಸಿ ಎಂದು ಅಮಿತ್ ಶಾ, ಬಿಎಸ್ ವೈಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 

ಅಲ್ಲದೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪ್ರತಿಯೊಂದು ಬೆಳವಣಿಗೆಯನ್ನು ನಮ್ಮ ಗುಪ್ತ ತಂಡ ಗಮನಿಸುತ್ತಿದೆ. ಗುಪ್ತ ತಂಡದ ವರದಿ ಆಧಾರದ ಮೇಲೆ ಕೈಗೊಳ್ಳಬೇಕಾದ ಕಾರ್ಯಾಚರಣೆ ಬಗ್ಗೆ ನಾವೇ ನಿಮಗೆ ತಿಳಿಸುತ್ತೇವೆ ಎಂದು ಶಾ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುದೀರ್ಘ ಚರ್ಚೆ ಬಳಿಕ ಅಮಿತ್ ಶಾಗೆ ಜೂನ್ 29 ರ ರಾಜ್ಯ ಕಾರ್ಯಕಾರಿಣಿಗೆ ಬಿಎಸ್‍ವೈ ಆಹ್ವಾನ ನೀಡಿದ್ದಾರೆ. ಬಳಿಕ ಸಮಯ ನೋಡಿಕೊಂಡು ಬೆಂಗಳೂರಿನ ಕಾರ್ಯಕಾರಿಣಿ ಸಭೆಗೆ ಬರುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.

Trending News