ನವೀನ್ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ನೀಟ್ ವ್ಯವಸ್ಥೆಗೆ ಚರಮಗೀತೆ ಹಾಡಬೇಕು: ಎಚ್​ಡಿಕೆ

'ನವೀನ್ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಕ್ಕೆ ಕರುಣಿಸಲಿ. ಪುತ್ರನ ಪಾರ್ಥೀವ ಶರೀರವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿ ಅವರ ಫೋಷಕರು ಸಾರ್ಥಕತೆ ಮೆರೆದಿದ್ದಾರೆ'

Written by - Zee Kannada News Desk | Last Updated : Mar 21, 2022, 05:43 PM IST
  • ಸಿಎಂ ಬಸವರಾಜ್ ಬೊಮ್ಮಾಯಿಯವರು ವೈದ್ಯ ಶಿಕ್ಷಣ ಶುಲ್ಕ ಕಡಿಮೆ ಮಾಡುವ ಹೇಳಿಕೆ ನೀಡುತ್ತಾರೆ
  • ಖಾಸಗಿ ಕಾಲೇಜುಗಳಲ್ಲಿ ವೈದ್ಯ ಶಿಕ್ಷಣ ದುಬಾರಿ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ
  • ಆದರೆ ನೀಟ್ ವಿರುದ್ಧ ಚಕಾರ ಎತ್ತುತ್ತಿಲ್ಲ ಏಕೆ? ಎಂದು ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ
ನವೀನ್ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ನೀಟ್ ವ್ಯವಸ್ಥೆಗೆ ಚರಮಗೀತೆ ಹಾಡಬೇಕು: ಎಚ್​ಡಿಕೆ title=
'ನೀಟ್ ವಿರುದ್ಧ ಸಿಎಂ ಚಕಾರ ಎತ್ತುತಿಲ್ಲವೇಕೆ'

ಬೆಂಗಳೂರು: ನವೀನ್(Naveen Gyangoudar) ಆತ್ಮಕ್ಕೆ ಶಾಂತಿ ಸಿಗಬೇಕಾದರೆ ನೀಟ್ ವ್ಯವಸ್ಥೆಗೆ ಚರಮಗೀತೆ ಹಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಒತ್ತೆ ಇಟ್ಟ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸಗಿದ ಪಾಪಕ್ಕೆ ಮುಗ್ಧ ವಿದ್ಯಾರ್ಥಿ ನವೀನ್ ಬಲಿ ಆಗಿದೆ’ ಎಂದು ಕಿಡಿಕಾರಿದ್ದಾರೆ.

‘ರಾಜಕಾರಣಿಗಳು, ಶ್ರೀಮಂತರಿಗೆ ಉನ್ನತ ಶಿಕ್ಷಣವು ದುಡ್ಡು ಸಂಗ್ರಹ ಮಾಡುವ ಹುಂಡಿಯಾಗಿದೆ. ಇದರಲ್ಲಿ ಅನುಮಾನವೇ ಇಲ್ಲ. ನೀಟ್ ಮೂಲಕ ವೈದ್ಯಕೀಯ ಸೀಟು ಸಿಗದೇ ಉಕ್ರೇನ್(Russia-Ukraine War) ಗೆ ಹೋಗಿ ಉಸಿರು ಚೆಲ್ಲಿದ ನವೀನ್ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ನೀಟ್ ವ್ಯವಸ್ಥೆಗೆ ಚರಮಗೀತೆ ಹಾಡಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

‘ದೂರದ ಉಕ್ರೇನ್ ದೇಶ(Russia Ukraine Crisis)ದಲ್ಲಿ ಜೀವ ಚೆಲ್ಲಿ ಹುಟ್ಟಿದೂರಿನಲ್ಲಿ ನಿಶ್ಚಲವಾಗಿ ಮಲಗಿದ್ದ ನವೀನ್ ಭಾರತದ ಆತ್ಮಸಾಕ್ಷಿಗೆ ಎದುರಾಗಿರುವ ದೊಡ್ಡ ಪ್ರಶ್ನೆ. ವಿದ್ಯೆ ಹೆಸರಿನಲ್ಲಿ ದಂಧೆ ನಡೆಸುವ ದುರಾಸೆಗೂ ಒಂದು ಸವಾಲು. ಹಾಗಾದರೆ, ಇನ್ನೆಷ್ಟು ನವೀನರು ಬಲಿ ಆಗಬೇಕು?’ ಅಂತಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿನವೀನ್ ಮೃತದೇಹ ತಾಯ್ನಾಡಿಗೆ : ದೂರವಾಣಿ ಕರೆ ಮೂಲಕ ಪಿಎಂಗೆ ಧನ್ಯವಾದ ಎಂದ ಸಿಎಂ

‘ಧನದಾಹಕ್ಕೆ ಕಡಿವಾಣ ಹಾಕಿ ಎಲ್ಲರಿಗೂ ಮೆಡಿಕಲ್ ಸೀಟು ಕೊಡಿಸುವ ಉದ್ದೇಶದಿಂದ ಜಾರಿಗೆ ಬಂದ ನೀಟ್ ವ್ಯವಸ್ಥೆ(NEET Exam Pattern) ಸಂಪೂರ್ಣ ವಿಫಲವಾಗಿದೆ. ನವೀನ್ ಸಾವಿನಿಂದ ಜ್ಞಾನೋದಯ ಆಗಿದೆ ಎನ್ನುವ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ವೈದ್ಯ ಶಿಕ್ಷಣ ಶುಲ್ಕ ಕಡಿಮೆ ಮಾಡುವ ಹೇಳಿಕೆ ನೀಡುತ್ತಾರೆ. ಆದರೆ, ನೀಟ್ ವಿರುದ್ಧ ಚಕಾರ ಎತ್ತುತ್ತಿಲ್ಲ, ಯಾಕೆ?’ ಅಂತಾ ಎಚ್​ಡಿಕೆ(HD Kumaraswamy) ಪ್ರಶ್ನಿಸಿದ್ದಾರೆ.

‘ಖಾಸಗಿ ಕಾಲೇಜುಗಳಲ್ಲಿ ವೈದ್ಯ ಶಿಕ್ಷಣ ದುಬಾರಿ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ. ಹಾಗಾದರೆ, ಅಂಥ ಕಾಲೇಜುಗಳಿಗೆ ಶಕ್ತಿ ತುಂಬುತ್ತಿರುವುದು ಏಕೆ! ಸರ್ಕಾರಿ ವೈದ್ಯ ಕಾಲೇಜುಗಳಲ್ಲಿ ಕನ್ನಡದ ಮಕ್ಕಳಿಗೆ ಸೀಟು ಸಿಗುತ್ತಿಲ್ಲ. ಟ್ಯೂಷನ್ ಅಂಗಡಿಗಳಿಗೆ ಲಕ್ಷ ಲಕ್ಷ ಕಟ್ಟುವುದು ಬಡ, ಮಧ್ಯಮ ವರ್ಗದ ಮಕ್ಕಳಿಗೆ ಸಾಧ್ಯವಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

‘ಮೂತಿಗೆ ತುಪ್ಪ ಸವರುವಂತೆ ವೈದ್ಯ ಶಿಕ್ಷಣದ ಶುಲ್ಕವನ್ನು ಅಲ್ಪಸ್ವಲ್ಪ ಕಡಿಮೆ ಮಾಡಿ ಸದ್ಯಕ್ಕೆ ಪಾರಾಗುವುದಲ್ಲ. ಉಕ್ರೇನ್ ಮತ್ತು ನವೀನ್ ಸಾವಿನಿಂದ ಪಾಠ ಕಲಿತು ಅದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಹಾಗೂ ನೀಟ್(NEET Exam) ನಿಂದ ಹೊರಬರಲು ವಿಧಾನ ಮಂಡಲದಲ್ಲಿ ನಿರ್ಣಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ತನ್ವೀರ್ ಸೇಠ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಡಿಕೆಶಿಯವರಿಗೆ ಭಯವೇ?: ಬಿಜೆಪಿ

‘ನವೀನ್ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಕ್ಕೆ ಕರುಣಿಸಲಿ. ಪುತ್ರನ ಪಾರ್ಥೀವ ಶರೀರವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿ ಅವರ ಫೋಷಕರು ಸಾರ್ಥಕತೆ ಮೆರೆದಿದ್ದಾರೆ. ಅವರ ದುಃಖದಲ್ಲಿ ನಾನೂ ಭಾಗಿ. ನೀಟ್(NEET Exam) ನಿಲ್ಲಲೇಬೇಕು. ಅದರ ಕಾರಣಕ್ಕೆ ಬಡಮಕ್ಕಳ ಉಸಿರು ಚೆಲ್ಲುವುದು ನಿಲ್ಲಬೇಕು. ಸರ್ಕಾರ ಮಾತುಗಳ ಮೂಲಕ ಮಕ್ಕಳನ್ನು ಮರಳು ಮಾಡುವುದು ಬೇಡ. ಇದು ನನ್ನ ಆಗ್ರಹ’ವೆಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News