ಬಿಜೆಪಿಯವರಿಗೆ ನಿಜವಾಗ್ಲೂ ಮಾನ ಮರ್ಯಾದೆ ಇದ್ಯಾ?: ಟೆಲಿಫೋನ್ ಕದ್ದಾಲಿಕೆ ಆರೋಪಕ್ಕೆ ಹೆಚ್‍ಡಿಡಿ ಕಿಡಿ

 ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಟೆಲಿಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೇವೇಗೌಡರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

Last Updated : Aug 15, 2019, 02:01 PM IST
ಬಿಜೆಪಿಯವರಿಗೆ ನಿಜವಾಗ್ಲೂ ಮಾನ ಮರ್ಯಾದೆ ಇದ್ಯಾ?: ಟೆಲಿಫೋನ್ ಕದ್ದಾಲಿಕೆ ಆರೋಪಕ್ಕೆ ಹೆಚ್‍ಡಿಡಿ ಕಿಡಿ title=

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು, ಬಿಜೆಪಿಯವರಿಗೆ ನಿಜವಾಗ್ಲೂ ಮಾನ ಮರ್ಯಾದೆ ಇದ್ಯಾ ಎಂದು ಪ್ರಶ್ನಿಸಿದ್ದಾರೆ.

ನಗರದ ಜೆಡಿಎಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವೇಗೌಡರು, ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಟೆಲಿಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ರಾಜ್ಯದಲ್ಲಿ ಸರ್ಕಾರ ಉಳಿಸಿಕೊಳ್ಳಲು ಕುಮಾರಸ್ವಾಮಿ ಅವರು ಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ಅವರಿಗೆ ಮಾಡಕ್ಕೆ ಬೇರೆ ಕೆಲಸ ಇಲ್ವಾ? ಅವರು ಏನೇನು ಮಾಡಿದ್ದಾರೆ ಅನ್ನೋದು ನಂಗೆ ಚೆನ್ನಾಗಿ ಗೊತ್ತಿದೆ ಎಂದು ದೇವೇಗೌಡರು ಕಿಡಿ ಕಾರಿದರು. 

"ಬಿಜೆಪಿ ಅವರಿಗೆ ಮಾನ ಮರ್ಯಾದೆ ಇದೆಯಾ? ಟೆಲಿಫೋನ್ ಕದ್ದಾಲಿಕೆ ಬಗ್ಗೆ ನಾನು ಬಹಳಷ್ಟು ಮಾತನಾಡಬಲ್ಲೆ. ಯಾವ ಮುಖ್ಯಮಂತ್ರಿ ಕಾಲದಲ್ಲಿ ಏನಾಗಿದೆ ಎನ್ನುವ ಬಗ್ಗೆ ನನಗೆ ಎಲ್ಲಾ ಗೊತ್ತಿದೆ. ಯಾವ ರಾಜ್ಯದಲ್ಲಿ ಫೋನ್ ಕ್ದ್ದಾಲಿಗೆ ಆಗಿದೆ ಅನ್ನೂ ವಿಚಾರವೂ ಗೊತ್ತಿದೆ. ಕೇಂದ್ರದಲ್ಲಿ ಇನ್ನು ನಡೀತಿದೆ? ಯಾರ ಕಾಲದಲ್ಲಿ ಏನಾಗಿದೆ ಅನ್ನೋದೂ ನನಗೆ ಗೊತ್ತು. ಆದರೆ ಈ ಬಗ್ಗೆ ಚರ್ಚೆ ಮಾಡುವ ಅಗತ್ಯ ಇಲ್ಲ" ಎಂದು ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದರು.

Trending News