ಮೇಕೆದಾಟು ವಿಚಾರವನ್ನಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಿಂದ ಚುನಾವಣಾ ಆಟ: ಎಚ್​ಡಿಕೆ

ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ‘ಚುನಾವಣಾ ಆಟʼ ಶುರು ಮಾಡಿವೆ ಅಂತಾ ಕುಮಾರಸ್ವಾಮಿ ಕುಟುಕಿದ್ದಾರೆ.

Written by - Zee Kannada News Desk | Last Updated : Mar 6, 2022, 11:14 AM IST
  • ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು
  • ರಾಷ್ಟ್ರೀಯ ಪಕ್ಷಗಳ ಮೇಕೆದಾಟು ಯೋಜನೆ ವಿಚಾರದಲ್ಲಿ ಮಕ್ಮಲ್‌ ಟೋಪಿ ಹಾಕುತ್ತಿವೆ
  • ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡುವಲ್ಲಿ ಕೇಂದ್ರದ ಪಾತ್ರವೇ ಇಲ್ಲವೇ? ಅಂತಾ ಪ್ರಶ್ನಿಸಿದ ಎಚ್​ಡಿಕೆ
ಮೇಕೆದಾಟು ವಿಚಾರವನ್ನಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಿಂದ ಚುನಾವಣಾ ಆಟ: ಎಚ್​ಡಿಕೆ title=
ಕೇಂದ್ರ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಮೇಕೆದಾಟು ಯೋಜನೆ(Mekedatu Project)ಯ ವಿಚಾರವನ್ನಿಟ್ಟುಕೊಂಡು ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಚುನಾವಣಾ ಆಟವನ್ನಾಡುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಆರೋಪಿಸಿದ್ದಾರೆ. #ರಾಷ್ಟ್ರೀಯ_ಪಕ್ಷಗಳ_ಮೇಕೆದಾಟು_ಮಕ್ಮಲ್‌ಟೋಪಿ ಹ್ಯಾಶ್ ಟ್ಯಾಗ್ ಬಳಿಸಿ ಅವರು ಭಾನುವಾರ ಸರಣಿ ಟ್ವೀಟ್ ಮಾಡಿದ್ದಾರೆ.

‘ಮೇಕೆದಾಟು ಯೋಜನೆ ‘ವಿವಾದ’ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌(Gajendra Singh Shekhawat)ಹೇಳಿದ್ದಾರೆ. ಅವರೇ ‘ವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ‘ಬಿಕ್ಕಟ್ಟಿನ ಲೇಪನʼ ಹಚ್ಚಿದ್ದಾರೆ’ ಅಂತಾ ಟೀಕಿಸಿದ್ದಾರೆ.

‘ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುವ ಮೂಲಕ, ‘ಮೇಕೆದಾಟು ಯೋಜನೆ(Mekedatu Project)ಗೆ ಒಕ್ಕೂಟ‌ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆʼ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ’ ಅಂತಾ ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ ವಿದ್ಯಾರ್ಥಿಗಳಿಗೆ ಕೊನೆಗೂ ಸಿಕ್ಕ ಬಸ್ ವ್ಯವಸ್ಥೆ..!

‘ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆ(Mekedatu Congress Padayatre)ಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್‌ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ‘ಚುನಾವಣಾ ಆಟʼ ಶುರು ಮಾಡಿವೆ’ ಅಂತಾ ಕುಟುಕಿದ್ದಾರೆ.

‘ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೇಂದ್ರದ ಕಾನೂನು ಸುಳಿಯಲ್ಲಿ ಸಿಕ್ಕಿರುವ ಹಾಗೂ ಕೇಂದ್ರದ ಜಲ ಆಯೋಗ (CWC)ದಲ್ಲಿ ಕೊಳೆಯುತ್ತಿರುವ ಮೇಕೆದಾಟು ಯೋಜನೆ(Mekedatu Project)ಯು ಪಾದಯಾತ್ರೆಯಿಂದ ಬರುವುದಿಲ್ಲ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿಯೇ ತಂದುಕೊಳ್ಳಬೇಕು ಎಂದಿದ್ದೆ. ಈಗ ಕೇಂದ್ರ ಸಚಿವ ಶೇಖಾವತ್‌(Gajendra Singh Shekhawat) ಅವರು, ‘ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಉಂಟು, ತಮಿಳುನಾಡು ಉಂಟು. ನೀವು ನೀವೇ ಮಾತನಾಡಿಕೊಳ್ಳಿ’ ಎಂದು ಕೈ ಎತ್ತಿಬಿಟ್ಟಿದ್ದಾರೆ. ಹಾಗಾದರೆ ಯೋಜನೆಗೆ ಒಪ್ಪಿಗೆ ನೀಡುವಲ್ಲಿ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲವೇ?’ ಅಂತಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Fire Accident : ಬೆಳ್ಳಂ ಬೆಳಿಗ್ಗೆ ಬೆಂಕಿ ಅವಘಡ : ಹೊತ್ತಿ ಉರಿದ ಗ್ಯಾಸ್ ಬುಕ್ಕಿಂಗ್ ಕಟ್ಟಡ!

‘ನಮ್ಮ ಪಾಲಿನ ನೀರನ್ನು ದಕ್ಕಿಸಿಕೊಳ್ಳುವುದು ಮತ್ತು ನಮ್ಮ ಜನರಿಗೆ ಕುಡಿಯುವ ನೀರು ಕೊಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವುದು ಕರ್ನಾಟಕದ ಹಕ್ಕು. ಆದರೆ ಕೇಂದ್ರ ಸಚಿವರು ‘ನೀವೇ ಬಗೆಹರಿಸಿಕೊಳ್ಳಿʼ ಎಂದು ಹೇಳಿದ ಒಳಮರ್ಮವೇನು? ಕಾವೇರಿ(Kaveri River) ಬಗ್ಗೆ ಬಿಜೆಪಿ ‘ಹೊಸ ವರಸೆʼ ಶುರು ಮಾಡಿತೇ ಎನ್ನುವ ಸಂಶಯ ನನ್ನದು. ಈ ಬಗ್ಗೆ 1,000 ಕೋಟಿ ರೂ. ಹಣ ಘೋಷಣೆ ಮಾಡಿದೊಡನೆ ಪಾದಯಾತ್ರೆಯಿಂದಲೇ ಆಯಿತು ಎಂದು ‘ಹಿಗ್ಗಿ ಹೀರೆಕಾಯಿʼ ಆಗಿದ್ದ ಕಾಂಗ್ರೆಸ್‌ ನಿಲುವೇನು? ಅವರೀಗ ತಮ್ಮ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡು ಸರ್ಕಾರದ ಜೊತೆ ಮಾತುಕತೆ ನಡೆಸಿ ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಾರಾ?’ ಅಂತಾ ಎಚ್​ಡಿಕೆ ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News