ನಮ್ಮ ಹೆಸರಲ್ಲಿ ನೈಸ್ ಆಸ್ತಿ ಇದ್ದರೆ ಇಡೀ ಕುಟುಂಬವೇ ರಾಜಕೀಯ ನಿವೃತ್ತಿ: ಎಚ್.ಡಿ.ಕುಮಾರಸ್ವಾಮಿ

HD Kumaraswamy on Nice property: ನೈಸ್ ವಿಚಾರ ಇಟ್ಟುಕೊಂಡು ಕುಮಾರಸ್ವಾಮಿ ವ್ಯವಹಾರ ಮಾಡುತ್ತಾರೆ ಎಂಬ ಡಿ.ಕೆ.ಸುರೇಶ್ ಹೇಳಿಕೆಗೆ ಕೆಂಡಾಮಂಡಲರಾದ ಕುಮಾರಸ್ವಾಮಿ, ‘ಅವರ (ನೈಸ್)ಜೊತೆ ಶಾಮೀಲಾಗಿ ಜಮೀನು ಲೂಟಿ ಹೊಡೀಲಿ ಅಂತಾ ದೇವೇಗೌಡರು ಸಹಿ ಹಾಕಿದ್ರಾ? ಎಂದು ಪ್ರಶ್ನಿಸಿದರು.

Last Updated : Aug 18, 2023, 07:31 PM IST
  • 2,000 ಎಕರೆ ಭೂಮಿಯನ್ನು ಯಾರ ಹೆಸರಿಗೆ ಮಾಡಿಕೊಳ್ಳಲು ಹೊರಟಿದ್ದೀರಿ?
  • ಎಚ್.ಡಿ.ದೇವೇಗೌಡರು ಸಹಿ ಹಾಕಿದ್ದು ರಸ್ತೆ ಮಾಡಲಿಕ್ಕೆ, ಭೂಮಿ ಲೂಟಿ ಹೊಡೆಯುವುದಕ್ಕೆ ಅಲ್ಲ
  • ಡಿಕೆ ಸಹೋದರರ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ
ನಮ್ಮ ಹೆಸರಲ್ಲಿ ನೈಸ್ ಆಸ್ತಿ ಇದ್ದರೆ ಇಡೀ ಕುಟುಂಬವೇ ರಾಜಕೀಯ ನಿವೃತ್ತಿ: ಎಚ್.ಡಿ.ಕುಮಾರಸ್ವಾಮಿ  title=
ಡಿಕೆ ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ!

ಬೆಂಗಳೂರು: ನಮ್ಮ ಕುಟುಂಬದ ಯಾವೊಬ್ಬ ವ್ಯಕ್ತಿಯ ಹೆಸರಿನಲ್ಲೂ ನೈಸ್ ಆಸ್ತಿ ಇಲ್ಲ. ಒಂದು ವೇಳೆ ಇದ್ದರೆ ನಮ್ಮ ಇಡೀ ಕುಟುಂಬವೇ ರಾಜಕೀಯ ನಿವೃತ್ತಿ ಪಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಸಂಸದ ಡಿ.ಕೆ.ಸುರೇಶ್ ಮಾಡಿದ್ದ ಟೀಕೆಗೆ ತಿರುಗೇಟು ನೀಡಿದರು.

ನೈಸ್ ಯೋಜನೆಗಳ ಅಕ್ರಮಗಳಿಗೆ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ನೇರ ಕಾರಣ. ಈ ವಿಷಯ ಇಡೀ ರಾಜ್ಯಕ್ಕೆ ಗೊತ್ತಿದೆ. ನೈಸ್ ಅಕ್ಕಪಕ್ಕ ಜಮೀನುಗಳನ್ನು ಯಾರು ಕೊಳ್ಳೆ ಹೊಡೆದಿದ್ದಾರೆ ಎನ್ನುವುದೂ ತಿಳಿದಿದೆ. ನೈಸ್ ಯೋಜನೆಗೆ ಸಹಿ ಹಾಕಿದ್ದು ಅಂದಿನ ಸಿಎಂ ಎಚ್.ಡಿ.ದೇವೇಗೌಡರೆಂದು ಡಿ.ಕೆ.ಸುರೇಶ್ ನೀಡಿದ್ದ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಎಚ್‍ಡಿಕೆ, ದೇವೇಗೌಡರು ಸಹಿ ಹಾಕಿದ್ದು ರಸ್ತೆ ಮಾಡಲಿಕ್ಕೆ. ಅಲ್ಲಿನ ಭೂಮಿ ಲಪಟಾಯಿಸುವುದಕ್ಕೆ ಅಲ್ಲವೆಂದು ಕಿಡಿಕಾರಿದರು.

 ನೈಸ್ ವಿಚಾರ ಇಟ್ಟುಕೊಂಡು ಕುಮಾರಸ್ವಾಮಿ ವ್ಯವಹಾರ ಮಾಡುತ್ತಾರೆ ಎಂಬ ಡಿ.ಕೆ.ಸುರೇಶ್ ಹೇಳಿಕೆಗೆ ಕೆಂಡಾಮಂಡಲರಾದ ಕುಮಾರಸ್ವಾಮಿ, ‘ಅವರ (ನೈಸ್)ಜೊತೆ ಶಾಮೀಲಾಗಿ ಜಮೀನು ಲೂಟಿ ಹೊಡೀಲಿ ಅಂತಾ ದೇವೇಗೌಡರು ಸಹಿ ಹಾಕಿದ್ರಾ? ಒಂದು ಸಣ್ಣ ಸಾಕ್ಷಿ ಇದ್ದರೆ ತೋರಿಸಲಿ, ದೇವೇಗೌಡರ ಕುಟುಂಬವೇ ರಾಜಕೀಯ ನಿವೃತ್ತಿ ಹೊಂದುತ್ತದೆ ಎಂದು ಸವಾಲು ಹಾಕಿದರು.  

ಇದನ್ನೂ ಓದಿ: ಶಾಲಾ‌ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಯೋಜನೆಗೆ ಚಾಲನೆ..!

ಮೂಲ ಒಪ್ಪಂದ ತಿರುಚಿ ಚೌಕಟ್ಟಿನ ಒಪ್ಪಂದಕ್ಕೆ (ಫ್ರೇಮ್ ವರ್ಕ್ ಅಗ್ರಿಮೆಂಟ್) ಸಹಿ ಹಾಕಿದ್ದು ಯಾರೆಂದು ಗೊತ್ತಿದೆಯಾ  ಅವನಿಗೆ? ಆವತ್ತಿನ ನಗರಾಭಿವೃದ್ಧಿ ಸಚಿವರಾಗಿ ಇದ್ದಿದ್ದು ಯಾರು? ಇವನ ಅಣ್ಣನೇ ಅಲ್ವಾ? ಆತನೇ ತಾನೇ ಈ ಒಪ್ಪಂದಕ್ಕೆ ಸಹಿ ಹಾಕಿದ್ದು. ಲೂಟಿ ಹೊಡೆದ ಭೂಮಿಯನ್ನು ಯಾರ ಹೆಸರಿಗೆ ಮಾಡಲು ಹೊರಟಿದ್ದಾರೆ ಅವರು? 2,000 ಎಕರೆ ಭೂಮಿಯನ್ನು ಯಾರ ಹೆಸರಿಗೆ ಮಾಡಿಕೊಳ್ಳೊಕೆ ಹೊರಟಿದ್ದಾರೆ? ಅವರ ಕುಟುಂಬವೇ ನುಂಗಲು ಹೊರಟಿದೆ. ಇಂಥವರು ನಮ್ಮ ಕುಟುಂಬದ ಬಗ್ಗೆ ಮತನಾಡುತ್ತಾರೆಂದು ಡಿಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ರಾಜ್ಯವನ್ನು ಮಾರಾಟ ಮಾಡುತ್ತಿದ್ದಾರೆ!

ಶಿಕ್ಷಣ ಇಲಾಖೆಯಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ ಅವರು ಸಭೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಎಚ್‍ಡಿಕೆ, ರಾಜ್ಯವನ್ನು ಮಾರಾಟ ಮಾಡಲು ಹೊರಟಿದ್ದಾರೆ ಇವರು. ಬಡ ಮಕ್ಕಳಿಗೆ ಶಿಕ್ಷಣ ಕೊಡಲು ಇವರಿಗೆ ಯೋಗ್ಯತೆ ಇಲ್ಲ. ನಮ್ಮ ರಾಜ್ಯದಲ್ಲಿಯೇ ಈಸ್ಟ್ ಇಂಡಿಯಾ ಕಂಪನಿಗಳಿವೆ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷ್ಯ ಬೇಕಾ ಎಂದು ಪ್ರಶ್ನಿಸಿದರು.

ನನಗೆ ಜನರು ರೆಸ್ಟ್ ಕೊಟ್ಟಿದ್ದಾರಂತೆ. ಇವರಿಗೂ ರೆಸ್ಟ್ ಕೊಡುವ ಕಾಲ ಹತ್ತಿರದಲ್ಲೇ ಇದೆ. ನನಗೆ ಬೆದರಿಕೆ ಹಾಕುವುದು ಬೇಡ. ಗುತ್ತಿಗೆದಾರರಿಗೆ ಬೆದರಿಕೆ ಹಾಕಿದಂತೆ ನನಗೆ ಬೆದರಿಕೆ ಹಾಕಲು ಸಾಧ್ಯವಿಲ್ಲ. ನೀವು, ನಿಮ್ಮ ಅಣ್ಣ ನಮಗೆ ಬೆದರಿಕೆ ಹಾಕಲು ಆಗಲ್ಲ ಎಂದು ಡಿಕೆ ಸಹೋದರರ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: "ಸ್ಟಾಲಿನ್ ನಿಮ್ಮ ಸ್ನೇಹಿತರೇ ಅಲ್ಲವೇ? ಮೇಕೆದಾಟು ಅಣೆಕಟ್ಟು ಕಟ್ಟಿ"

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ 40% ಕಮಿಷನ್ ಬಗ್ಗೆ ತನಿಖೆ ಮಾಡಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್‍ಡಿಕೆ, 2016-17ರಲ್ಲಿ ಜಾಬ್ ಕಾರ್ಡ್‍ದು  ಇದೇ ನಾಗಮೋಹನ್ ದಾಸ್ ಅವರ ಬಳಿ ತನಿಖೆ ಮಾಡಿಸಿದ್ದರು. ಅದು ಎಲ್ಲಿದೆ? ಆ ವರದಿ ಕಥೆ ಏನಾಯಿತು? ನ್ಯಾಯಮೂರ್ತಿ ವೀರಪ್ಪ ಅವರ ನೇತೃತ್ವದಲ್ಲಿ ತನಿಖೆ ಎಂದರು. ಬಹುಶಃ ಅವರು ಒಪ್ಪಿಲ್ಲ ಅಂತಾ ಕಾಣುತ್ತೆ. ಹೀಗಾಗಿ ಇವರಿಗೆ ವಹಿಸಿದ್ದಾರೆ ಅನಿಸುತ್ತದೆ. ನಾಗಮೋಹನ್ ದಾಸ್ ಕೈಲಿ ತನಿಖೆ ಮಾಡಿಸಿ, ಆ ವರದಿ ಹಾಗೆ ಇಟ್ಟುಕೊಳ್ಳುತ್ತಾರೆ ಅಷ್ಟೆ. ಅದರ ಫಲಿತಾಂಶ ಹೇಗಿರುತ್ತದೆ ಎನ್ನುವುದು ಗೊತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News