ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್

ತಾಯಿ ಚಾಮುಂಡೇಶ್ವರಿಯಲ್ಲಿ ಈ ವರ್ಷ ಉತ್ತಮ ಮಳೆಯಾಗಲಿ ಎಂದು ಬೇಡಿಕೊಂಡಿದ್ದೆವು. ನಮ್ಮ ಬದುಕು ಉಳಿಸು ಎಂದು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದೆವು, ಮನುಷ್ಯ ಪ್ರಯತ್ನಕ್ಕೆ ಸೋಲಾಗಬಹುದು ಆದರೆ ಪ್ರಾರ್ಥನೆಗೆ ಎಂದೂ ಸೋಲಾಗುವುದಿಲ್ಲ ಎನ್ನುವುದಕ್ಕೆ ಕಾವೇರಿ ತಾಯಿ ತುಂಬಿ ಹರಿಯುತ್ತಿರುವುದೇ ಸಾಕ್ಷಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

Written by - Prashobh Devanahalli | Edited by - Puttaraj K Alur | Last Updated : Jul 29, 2024, 04:22 PM IST
  • ಈ ಬಾರಿ ಉತ್ತಮ ಮಳೆಯಿಂದ ತಮಿಳುನಾಡಿಗೆ 84TMCಯಷ್ಟು ನೀರು ತಲುಪಿದೆ
  • ಮುಂದಿನ 10 ವರ್ಷವೂ ಬಾಗಿನ ಅರ್ಪಿಸಲು ಕಾವೇರಿ ತಾಯಿ ಅವಕಾಶ ನೀಡುತ್ತಾಳೆ
  • ಮಂಡ್ಯದ KRS ಅಣೆಕಟ್ಟಿಗೆ ಬಾಗಿನ ಸಮರ್ಪಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್
ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್ title=
KRS ಅಣೆಕಟ್ಟಿಗೆ ಬಾಗಿನ ಸಮರ್ಪಣೆ

ಮಂಡ್ಯ(KRS): ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84TMCಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ನೀಡುತ್ತಾಳೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. KRS ಅಣೆಕಟ್ಟಿಗೆ ಬಾಗಿನ ಸಮರ್ಪಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ʼಜುಲೈ ತಿಂಗಳಿನಲ್ಲಿ ಪ್ರತಿದಿನ 1TMCಯಂತೆ ತಮಿಳುನಾಡಿಗೆ 40TMC ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ ಕಾವೇರಿ ನೆಮ್ಮದಿ ಶಾಂತಿ ತಂದಿದ್ದಾಳೆ ಎಂದು ಹೇಳಿದರು.

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಿದೆ. ಸಂಕಷ್ಟ ಕಾಲದಲ್ಲಿ ಅವರ ಪಾಲಿನ 177TMC ನೀರನ್ನು ಅವರಿಗೆ ಹರಿಸಬಹುದು. ಸುಮಾರು 400 ಮೆಗಾ ವ್ಯಾಟ್‌ ವಿದ್ಯುತ್ ತಯಾರಿಸಬಹುದು. ಈ ಅಣೆಕಟ್ಟು ಕಟ್ಟಲು ನ್ಯಾಯಲಯವು ಅನುವು ಮಾಡಿಕೊಡುತ್ತದೆಂದು ನಂಬಿದ್ದೇವೆ. ತಮಿಳುನಾಡಿನ ಜನತೆಗೆ ಭಗವಂತನ ಕೃಪೆಯಿಂದ ಜ್ಞಾನೋದಯವಾಗುತ್ತದೆ. ನಮ್ಮ ಕಾಲದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಾರೆಂದು ನಂಬಿದ್ದೇವೆ ಎಂದರು. 2018-19ರಲ್ಲಿ 404TMC, 2019-20ರಲ್ಲಿ 275, 2020- 21ರಲ್ಲಿ 211, 2021-22ರಲ್ಲಿ 281, 2022-23ರಲ್ಲಿ 667 ಹಾಗೂ 2023-24ರಲ್ಲಿ 87TMC ನೀರು ತಮಿಳುನಾಡಿಗೆ ಹರಿದಿದೆ. ಈ ವರ್ಷ 84TMC ನೀರು ಹರಿದಿದ್ದು, ಇದೇ ರೀತಿ ಮಳೆ ಬರಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಬೇಕು” ಎಂದು ಹೇಳಿದರು.

ಇದನ್ನೂ ಓದಿರಕ್ತಸ್ರಾವಕ್ಕೆ ಚಿಕಿತ್ಸೆ ಪಡೆದು ಕುಮಾರಸ್ವಾಮಿ ಡಿಸ್ಚಾರ್ಜ್

ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ

“ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ. ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಮತ್ತು ತಮಿಳುನಾಡಿನವರು ಈ ನದಿಯ ಮೂಲಕ ಅನ್ನ ಬೆಳೆಯುತ್ತಿದ್ದೇವೆ. ಎಲ್ಲರ ಪಾಲಿನ ಜೀವನದಿ ಕಾವೇರಿಗೆ 92 ವರ್ಷ ಕಳೆದರೂ ನಮನ ಸಲ್ಲಿಸುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿಯಲ್ಲಿ ಈ ವರ್ಷ ಉತ್ತಮ ಮಳೆಯಾಗಲಿ ಎಂದು ಬೇಡಿಕೊಂಡಿದ್ದೆವು. ನಮ್ಮ ಬದುಕು ಉಳಿಸು ಎಂದು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದೆವು, ಮನುಷ್ಯ ಪ್ರಯತ್ನಕ್ಕೆ ಸೋಲಾಗಬಹುದು ಆದರೆ ಪ್ರಾರ್ಥನೆಗೆ ಎಂದೂ ಸೋಲಾಗುವುದಿಲ್ಲ ಎನ್ನುವುದಕ್ಕೆ ಕಾವೇರಿ ತಾಯಿ ತುಂಬಿ ಹರಿಯುತ್ತಿರುವುದೇ ಸಾಕ್ಷಿ. ಸ್ವರ್ಣಗೌರಿ ಹಬ್ಬದ ದಿನ ಮನೆಯ ಹೆಣ್ಣುಮಕ್ಕಳಿಗೆ ಬಾಗಿನ ಅರ್ಪಿಸಿದಂತೆ ಶುಭಗಳಿಗೆಯ ಅಭಿಜಿನ್ ಲಗ್ನದಲ್ಲಿ ಕಾವೇರಿ ತಾಯಿಗೆ ಬಾಗಿನ ಅರ್ಪಿಸಲಾಗಿದೆ” ಎಂದರು.

ಮೇಲಿರುವ ಮೋಡಕ್ಕೆ ಕೆಳಗೆ ಯಾವ ಸರ್ಕಾರ ಇದೆ ಎಂದು ಗೊತ್ತಿರುವುದಿಲ್ಲ?

“ತಮಿಳುನಾಡಿಗೆ ನಾನು ಅಥವಾ ಸಿದ್ದರಾಮಯ್ಯನವರು ನೀರು ಬಿಟ್ಟಿಲ್ಲ. ತಾಯಿ ಕೃಪೆಯಿಂದ ಹೆಚ್ಚು ಮಳೆ ಬಂದಿದೆ, ಆದ ಕಾರಣ ನೀರು ಅವರಿಗೆ ಹೋಗಿದೆ. ಮುಖ್ಯಮಂತ್ರಿಗಳು ಅಧಿಕಾರಕ್ಕೆ ಬಂದ ನಂತರ ಮಳೆ ಬರಲಿಲ್ಲ, ನೀರು ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅವರಿಗೆಲ್ಲ ಈಗ ತಕ್ಕ ಉತ್ತರ ಸಿಕ್ಕಿದೆ. ಮೇಲೆ ಇರುವ ಮೋಡಕ್ಕೆ ಕೆಳಗೆ ಯಾವ ಸರ್ಕಾರ ಅಧಿಕಾರದಲ್ಲಿ ಇದೆ ಎನ್ನುವುದು ಗೊತ್ತಿರುವುದಿಲ್ಲ” ಎಂದು ಇದೇ ವೇಳೆ ಡಿಕೆಶಿ ಟೀಕಿಸಿದರು.

ಮಳೆ ಇದೇ ರೀತಿ ಉತ್ತಮವಾಗಿ ಬಂದರೆ ತಮಿಳುನಾಡು ಪಾಲಿನ 177TMC ನೀರನ್ನು ಈ ವರ್ಷ ನೀಡಬಹುದು. ಕಳೆದ ವರ್ಷ 223 ತಾಲೂಕುಗಳಲ್ಲಿ ಬರ ಬಂದಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಟೀಕೆ ಮಾಡಿದರು. ಆದರೂ ನಾವು ಜನಪರವಾಗಿ ಕೆಲಸ ಮಾಡಿದೆವು. ಏಕೆಂದರೆ ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಯಾರನ್ನೂ ನಾನು ಟೀಕೆ ಮಾಡುವುದಿಲ್ಲ. ನಮ್ಮ ಕೆಲಸಗಳು ಅವರಿಗೆ ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತವೆ” ಎಂದು ಹೇಳಿದರು.

ಇದನ್ನೂ ಓದಿ: ಇಂದಿನಿಂದ ಆಗಸ್ಟ್ 1 ರವರೆಗೆ ಭಾರೀ ವರ್ಷಧಾರೆ

82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ

ಭಾರತದ ೭ ಪವಿತ್ರ ನದಿಗಳಲ್ಲಿ ಕಾವೇರಿಯೂ ಒಂದು. ಜನರ ಕುಡಿಯುವ ನೀರು, ವ್ಯವಸಾಯ, ಕೈಗಾರಿಕೆಗಳಿಗೆ ಕಾವೇರಿ ಜೀವ ನೀಡುತ್ತಿದ್ದಾಳೆ. ಈ ವರ್ಷ 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. ಸುಮಾರು 62 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು. ಕಾವೇರಿ ಜಲಾನಯನ ಪ್ರದೇಶಕ್ಕೆ ಹೊಸ ರೂಪ ನೀಡಲು ನಮ್ಮ ಸರ್ಕಾರ ಮುಂದಾಗಿದೆ. ಕಳೆದ ವರ್ಷ ಎಲ್ಲಾ ಕಾಲುವೆಗಳನ್ನು ಸ್ವಚ್ಚಗೊಳಿಸಲಾಗಿದೆ. ಕಾಲುವೆಯ ಕೊನೆ ಭಾಗದ ರೈತರಿಗೂ ನೀರು ತಲುಪಬೇಕು ಎಂದು 1964-65ರ ಕಾನೂನಿಗೆ ತಿದ್ದುಪಡಿ ತಂದು ಈ ಬಾರಿಯ ವಿಧಾನಸಭೆಯಲ್ಲಿ ಮಂಡನೆ ಮಾಡಿ ಹೊಸ ಕಾನೂನು ತಂದಿದ್ದೇವೆ. ರೈತರ ಬದುಕು ಹಸನಾಗಬೇಕು ಎಂದು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕು ಎನ್ನುವ ಕನಸನ್ನು ಸಚಿವ ಚೆಲುವರಾಯಸ್ವಾಮಿ ಅವರು ಹೊಂದಿದ್ದಾರೆ. ಇದು ಮಂಡ್ಯ ಜಿಲ್ಲೆಯ ರೈತರ ಬದುಕಿಗೆ ದೊಡ್ಡ ಮಾರ್ಗದರ್ಶನ ಸಿಗಲಿದೆ. ರೈತನಿಗೆ ಬಡ್ತಿ, ಸಂಬಳ, ನಿವೃತ್ತಿ ಎಂಬುದಿಲ್ಲ. ಆದ ಕಾರಣಕ್ಕೆ ರೈತರನ್ನು ನಾವು ಉಳಿಸಬೇಕಿದೆ ಎಂದರು.

ಸಂಕಷ್ಟದ ವರ್ಷಗಳಲ್ಲಿ ಮೇಕೆದಾಟು ಅಣೆಕಟ್ಟು ಪರಿಹಾರ ಎಂದು ನಾವು ಪಾದಯಾತ್ರೆ ಮಾಡಿದ್ದೆವು. ನಮ್ಮ ಎದುರು ಪಕ್ಷದವರು ಕೋವಿಡ್ ಕಾರಣ ಹೇಳಿ ಪಾದಯಾತ್ರೆಗೆ ತಡೆ ಹಾಕಿದರು. ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಪಾದಯಾತ್ರೆಗೆ ಸೇರುವ ವೇಳೆ ರಾಮನಗರದಲ್ಲಿ ಪಾದಯಾತ್ರೆ ನಿಲ್ಲುವಂತೆ ಮಾಡಲಾಯಿತು. ಯಾರೇ ಏನೇ ತಡೆ ಹಾಕಿದರೂ ಪಾದಯಾತ್ರೆ ಸಂಪೂರ್ಣ ಮಾಡುತ್ತೇವೆ ಎಂದು ಬೆಂಗಳೂರಿನ ತನಕ ಹೆಜ್ಜೆ ಹಾಕಿದೆವು. ಕಾವೇರಿ ತೀರದ ಎಲ್ಲಾ ಪ್ರದೇಶಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಜನ ಸೇವೆಗೆ ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮ ಜನರ ಋಣ ತೀರಿಸುತ್ತೇವೆ. ನಮ್ಮ ಮೇಲೆ ವಿಶ್ವಾಸವಿರಲಿ” ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News